29/01/2026
IMG-20251221-WA0022

ಮಕ್ಕಳ ಸರ್ವಾಂಗಿಣ ಬೆಳವಣಿಗೆಗೆ ಎರಡು ಹನಿ ಪೊಲಿಯೊ ಲಸಿಕೆ ಹಾಕಿಸಿ:
ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ-21:ಭಾರತ ಪೋಲಿಯೋ ಮುಕ್ತ ದೇಶವಾಗಿದ್ದು,
ಎರಡು ಹನಿ ಪೋಲಿಯೋ ಲಸಿಕೆ ಮಕ್ಕಳ ಅಂಗ ವೈಫಲ್ಯತೆ ತಪ್ಪಿಸಿ ಮಕ್ಕಳ ಸರ್ವತೋಮುಖ ಹಾಗೂ ಸರ್ವಾಂಗಿಣ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದರು.

ಗೋಕಾಕಿನ ತಾಯಿ‌ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಭಾನುವಾರ ನಡೆದ ಬೆಳಗಾವಿ ಜಿಲ್ಲಾ ಮಟ್ಟದ ರಾಷ್ಟ್ರೀಯ
ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹನಿ ಹಾಕುವ ಮೂಲಕ ಚಾಲನೆ ನೀಡಿದರು.

ಇತರೆ ದೇಶಗಳಲ್ಲಿ ಪೋಲಿಯೋ ಸೋಂಕು ಇರುವುದರಿಂದ ಮಕ್ಕಳ ಹಿತಾಸಕ್ತಿಗಾಗಿ ಸರ್ಕಾರ ಪೋಲಿಯೋ ಅಭಿಯಾನ ನಡೆಸಿಕೊಂಡು ಬರುತ್ತಿದೆ. ದೇಶದಲ್ಲಿ 2011 ರಲ್ಲಿ ಕೊನೆಯದಾಗಿ ಪೋಲಿಯೋ ಪ್ರಕರಣ ಕಂಡುಬಂದಿದ್ದು ಅದರಂತೆ ಬೆಳಗಾವಿ ಜಿಲ್ಲೆಯಲ್ಲಿ 1998 ರಲ್ಲಿ ಕೊನೆಯ ಪ್ರಕರಣ ದೃಡಪಟ್ಟಿದ್ದು ಆ ನಂತರ ಯಾವುದೇ ಪ್ರಕರಣ ಕಂಡುಬಂದಿರುವುದಿಲ್ಲ ಎಂದರು.

ಹತ್ತಿರದ ಪಲ್ಸ್ ಪೋಲಿಯೋ ಅಭಿಯಾನದಲ್ಲಿ ತಪ್ಪದೆ ಮಕ್ಕಳಿಗೆ ಪೋಲಿಯೋ ಲಸಿಕೆ ಕೊಡಿಸಬೇಕು.ಅಧಿಕಾರಿಗಳು ಸಕ್ರೀಯವಾಗಿ ಭಾಗವಹಿಸಿ ಸಾರ್ವಜನಿಕರ ಸಹಕಾರದೊಂದಿಗೆ 100%
ಸಾಧನೆಗೈಯಲು ಸೂಚಿಸಿದರು.

ಗೋಕಾಕ ಸಾರ್ವಜನಿಕ ಆಸ್ಪತ್ರೆ ಬಡ ರೋಗಿಗಳ ಪಾಲಿಗೆ
ಸಂಜೀವಿನಿಯಾಗಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದು ಈ ಆಸ್ಪತ್ರೆಯನ್ನು ಜಿಲ್ಲಾ ಮಟ್ಟದ ಆಸ್ಪತ್ರೆಯಾಗಿಸಲು
ಮುಂದಿನ ಸಚಿವ ಸಂಪುಟದಲ್ಲಿ ಚರ್ಚಿಸಿ ಕ್ರಮವಹಿಸುವುದಾಗಿ ಎಂದು ಸಚಿವರಾದ
ಸತೀಶ ಜಾರಕಿಹೊಳಿ ಅವರು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಈಶ್ವರಪ್ಪ
ಗಡಾದ ಅವರು ಮಾತನಾಡಿ ಪೋಲಿಯೋ ಲಸಿಕೆಯನ್ನು ಬಾಯಿ ಮೂಲಕ‌ ಹಾಗೂ
ಲಸಿಕೆಯೊಂದಿಗೆ ಮಗುವಿನ 6 ವಾರಕ್ಕೆ ಮತ್ತು 14 ವಾರಕ್ಕೆ ಇಂಜೆಕ್ಷನ್ ಮೂಲಕ ಕೂಡ ಲಸಿಕೆ ನೀಡಲಾಗುತ್ತಿರುವ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಂತಾನೋತ್ಪತ್ತಿ ತಾಯಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿಗಳಾದ ಡಾ. ಎಸ್.ಎಸ್. ಸಾಯನ್ನವರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಬಿ.ಬಿ. ಈಶ್ವರಪ್ಪಗೋಳ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಆರ್.ಜಿ. ಬಸ್ಸಾಪೂರ
ಜಿಲ್ಲಾ ನೋಡಲ್ ಅಧಿಕಾರಿಗಳು, ತಾಲೂಕಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ರೋಟರಿ, ಲಾಯನ್ಸ್, ಸ್ಕೌಟ್ಸ್, ಗೈಡ್ಸ್, ಮುಂತಾದ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಮತ್ತು ತಾಯಂದಿರು, ಮಕ್ಕಳು, ಇಲಾಖಾ ಸಿಬ್ಬಂದಿಯವರು ಹಾಜರಿದ್ದರು.

error: Content is protected !!