ಬೆಳಗಾವಿ-11:ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು.
ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆ ಕುರಿತು ಹಮ್ಮಿಕೊಂಡಿದ್ದ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕಾಮಟ್ಟದ ಅಧಿಕಾರಿಗಳ ವಿಡಿಯೋ ಸಂವಾದದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮೇ ತಿಂಗಳ ಅಂತ್ಯದವರೆಗೂ ನೀರಿನ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು, ಡ್ಯಾಮ್, ಬೋರವೆಲ್ ಗಳ ನೀರಿನ ಮಟ್ಟ ಪರಿಶೀಲಿಸಬೇಕು. ನೀರಿನ ಮಿತಬಳಕೆ ಹಾಗೂ ಕಾಯ್ದಿಟ್ಟುಕೊಳ್ಳುವುದಕ್ಕೆ ಒತ್ತು ನೀಡಬೇಕು ಎಂದು ಸೂಚಿಸಿದರು.
*ಕ್ಷೇತ್ರ ಭೇಟಿ ನೀಡಿ:*
ಸಂಬಂಧಪಟ್ಟ ಇಲಾಖೆಯ ಎಲ್ಲ ತಾಲೂಕಾ ಹಾಗೂ ಗ್ರಾಪಂಮಟ್ಟದ ಅಧಿಕಾರಿಗಳು ನೀರಿನ ಕೊರತೆಯಾಗುವಂತಹ ಗ್ರಾಮಗಳಿಗೆ ಈ ವಾರದಲ್ಲಿ ಭೇಟಿ ನೀಡಿ ಪರಿಶೀಲಿಸಿ, ಪೂರ್ವಸಿದ್ಧತೆ ಕೈಗೊಳ್ಳಬೇಕು. ನೀರಿನ ಸೂಕ್ತ ಬಳಕೆಯ ಕುರಿತು ಗ್ರಾಮಸ್ಥರಲ್ಲಿಯೂ ಜಾಗೃತಿ ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.
ಎಲ್ಲ ಗ್ರಾಮಗಳಲ್ಲಿನ ನೀರಿನ ಟ್ಯಾಂಕರ್ ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು. ಸ್ವಚ್ಛಗೊಳಿಸಿರುವ ಕುರಿತು ದಿನಾಂಕಗಳನ್ನು ಬರೆಯಿಸಬೇಕು. ನೀರಿನ ಮಾದರಿ ಪರೀಕ್ಷೆಗಳನ್ನು ಕೈಗೊಳ್ಳಬೇಕು. ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆ ಮಾಡಬೇಕು. ರೋಗ-ರುಜಿನಗಳು ಹರಡದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.
*ಟ್ಯಾಂಕರ್ ಗಳ ನಿರ್ವಹಣೆಗೆ ಕ್ರಮವಹಿಸಿ:*
ಜಿಲ್ಲೆಯ ಬಹುತೇಕ ಎಲ್ಲ ಗ್ರಾಪಂಗಳಲ್ಲೂ ಕುಡಿಯುವ ನೀರಿನ ಟ್ಯಾಂಕರ್ ಗಳು ಈಗಾಗಲೇ ಇವೆ. ಟ್ಯಾಂಕರ್ ಗಳು ಬೇಸಿಗೆ ಅವಧಿಯಲ್ಲಿ ಸಿದ್ಧವಾಗಿರುವಂತೆ ಕ್ರಮವಹಿಸಿ. ಅಗತ್ಯವಿರುವ ಕಡೆ ಕೂಡಲೇ ನೀರಿನ ಪೂರೈಕೆ ಮಾಡಿ. ಸಮರ್ಪಕ ನಿರ್ವಹಣೆ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.
ಎಲ್ಲ ತಾಲೂಕುಗಳಲ್ಲಿ ಈ ವಾರದಲ್ಲಿ ಕುಡಿಯುವ ನೀರಿನ ಟಾಸ್ಕಪೋರ್ಸ್ ಸಭೆಗಳನ್ನು ನಡೆಸಿ, ವರದಿ ಸಲ್ಲಿಸಿ. ಶಾಲಾ-ಕಾಲೇಜುಗಳು, ಅಂಗನವಾಡಿಗಳು ಹಾಗೂ ವಸತಿ ನಿಲಯಗಳಿಗೆ ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಕ್ರಮವಹಿಸಿ ಹಾಗೂ ನೀರಿನ ಮಿತ ಬಳಕೆಯ ಕುರಿತು ವಿದ್ಯಾರ್ಥಿಗಳಲ್ಲೂ ಜಾಗೃತಿ ಮೂಡಿಸಿ ಎಂದು ಸೂಚನೆ ನೀಡಿದರು.
*ಸ್ವಚ್ಛತಾ ಅಭಿಯಾನ ಆಂದೋಲನಕ್ಕೆ ಕೈಜೋಡಿಸಿ:*
ಬೆಳಗಾವಿ ಕಂದಾಯ ವಿಭಾಗದ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಪ್ರತಿ ತಿಂಗಳ ನಾಲ್ಕನೇ ಭಾನುವಾರ ಸ್ವಚ್ಛತಾ ಅಭಿಯಾನ ಆಂದೋಲನ ಹಮ್ಮಿಕೊಳ್ಳಲಾಗುತ್ತಿದ್ದು, ಅಭಿಯಾನದ ಅಂಗವಾಗಿ ರೂಪಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೈಜೋಡಿಸಿ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ್, ಉಪಕಾರ್ಯದರ್ಶಿ (ಅಭಿವೃದ್ಧಿ) ಬಸವರಾಜ ಅಡವಿಮಠ, ಉಪಕಾರ್ಯದರ್ಶಿ (ಆಡಳಿತ), ಬಸವರಾಜ ಹೆಗ್ಗನಾಯಕ್, ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಟರ್ ಸೇರಿ ಎಲ್ಲ ತಾಲೂಕಾ ಪಂಚಾಯತ ಆಡಳಿತಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಎಲ್ಲ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
