- ತಮಿಳುನಾಡಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಿರುಸಿನ ಪ್ರಚಾರ
- ಕೊಯಮತ್ತೂರಿನ ಕಾವುಂಡಪಾಳ್ಯಂ ಕ್ಷೇತ್ರದ ಇಡಿಕರೈನಲ್ಲಿ ಬಹಿರಂಗ ಸಮಾವೇಶದಲ್ಲಿ ಭಾಗಿ
- ಕೊಯಮತ್ತೂರು: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಕೈಬಲಪಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ.
ಕೊಯಮತ್ತೂರು ಜಿಲ್ಲೆಯ ಕಾವುಂಡಪಾಳ್ಯಂ ವಿಧಾನಸಭಾ ಕ್ಷೇತ್ರದ ಇಡಿಕರೈನಲ್ಲಿ ಭಾನುವಾರ ನಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಅಭ್ಯರ್ಥಿ ಸೂರ್ಯಪ್ರಕಾಶ್ ಅವರನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದರು.
ಡಿಎಂಕೆ ಪಕ್ಷದ ಮುಖಂಡರು, ಕಾರ್ಯಕರ್ತರು ಮನೆ ಮನೆಗೆ ಹೋಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಉತ್ತಮ ಕೆಲಸ ಮಾಡುತ್ತಿದ್ದು, ತಮಿಳುನಾಡಿನಲ್ಲಿ ಮತ್ತೊಮ್ಮೆ ಡಿಎಂಕೆ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾವುಂಡಪಾಳ್ಯಂ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೂರ್ಯಪ್ರಕಾಶ್ ಇನ್ನೂ ಯುವಕನಾಗಿದ್ದು, ನಿಮ್ಮ ಮನೆಯ ಮಗನಾಗಿ, ತಮ್ಮನಾಗಿ, ಗೆಳೆಯನಾಗಿ ಕ್ಷೇತ್ರದಲ್ಲಿ ಕೆಲಸ ಮಾಡಲಿದ್ದಾರೆ. ಯುವಕನಿಗೆ ನಿಮ್ಮ ಸೇವೆ ಮಾಡಲು ಅವಕಾಶ ನೀಡಬೇಕು ಎಂದರು.
ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ತೆಲಂಗಾಣದ ಜಲಸಂಪನ್ಮೂಲ ಖಾತೆ ಸಚಿವ ಉತ್ತಮ್ಕುಮಾರ್ ರೆಡ್ಡಿ, ಕಾವುಂಡಪಾಳ್ಯಂ ಕ್ಷೇತ್ರದ ಅಭ್ಯರ್ಥಿ ಸೂರ್ಯಪ್ರಕಾಶ್, ಮುಖಂಡರಾದ ಸುರೇಶ್, ಜನಾರ್ಧನ, ಸಂಗೀತಾ ಮಹಾಲಿಂಗ, ವತ್ಸಲಾ ದೇವಿ, ಸುಧಾಮಣಿ, ನಾಗ ಜ್ಯೋತಿ, ಮೂರ್ತಿ, ಮಾರಿ ಮುತ್ತು, ಕಲೈಸೆಲ್ವಿ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

