ಬೆಳಗಾವಿ-30:
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ತಾರಿಹಾಳ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆಯುತ್ತಿರುವ ಶ್ರೀ ಗ್ರಾಮದೇವಿಯ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ದೇವಿಗೆ ಪೂಜೆ ಸಲ್ಲಿಸಿ ಉಡಿ ತುಂಬಿದರು.
ದಶಕದ ನಂತರ ನಡೆಯುತ್ತಿರುವ ಈ ಜಾತ್ರೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಿಸಿದ್ದು, ಪ್ರತಿಯೊಂದು ಮನೆಯಲ್ಲೂ ಸಂಭ್ರಮ ಮತ್ತು ಉತ್ಸಾಹ ತುಂಬಿಸಿದೆ. ಜಾತ್ರಾ ಅಂಗವಾಗಿ ವಿಶೇಷ ಪೂಜೆಗಳು, ಶಾಸ್ತ್ರೋಕ್ತ ವಿಧಿವಿಧಾನಗಳು ನೆರವೇರಿಸಲ್ಪಟ್ಟಿದ್ದು, ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆದರು.
ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, “ಜನರ ನಗು ಮತ್ತು ಅಚಲವಾದ ಭಕ್ತಿಯೇ ನಮಗೆ ಸೇವೆ ಮಾಡಲು ಸ್ಫೂರ್ತಿ. ಜಗನ್ಮಾತೆ ಎಲ್ಲರಿಗೂ ಆಯುರಾರೋಗ್ಯ ನೀಡಿ ಕಾಪಾಡಲಿ” ಎಂದು ಹಾರೈಸಿದರು.
ಜಾತ್ರೆಯ ಅಂಗವಾಗಿ ಭಕ್ತಿಗೀತೆಗಳು, ಸಾಂಪ್ರದಾಯಿಕ ಆಚರಣೆಗಳು ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಸುತ್ತಮುತ್ತಲಿನ ಪ್ರದೇಶಗಳಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಜಾತ್ರೆಯನ್ನು ಕಳೆಗಟ್ಟಿಸಿದ್ದಾರೆ.
ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಗ್ರಾಮದ ಮುಖಂಡರು, ಹಿರಿಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದು, ಜಾತ್ರಾ ಮಹೋತ್ಸವ ಯಶಸ್ವಿಯಾಗಿ ನಡೆಯಲೆಂದು ಹಾರೈಸಿದರು.
ದೀರ್ಘ ವಿರಾಮದ ಬಳಿಕ ನಡೆಯುತ್ತಿರುವ ಈ ಜಾತ್ರೆ ಗ್ರಾಮದಲ್ಲಿ ಹೊಸ ಚೈತನ್ಯ ಮೂಡಿಸಿ, ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿದೆ.

