18/05/2026

ಯು.ಪಿ.ಎಸ್.ಸಿ ಪರೀಕ್ಷಾರ್ಥಿಗಳಿಗೆ ದೆಹಲಿಯಲ್ಲಿ ಭವನ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ-17: ಯು.ಪಿ.ಎಸ್.ಸಿ ಪರೀಕ್ಷೆ ಬರೆಯುವ ಬಡ ಹಾಗೂ ಗ್ರಾಮೀಣ ಭಾಗದ ಅಭ್ಯರ್ಥಿಗಳ ಅನುಕೂಲಕ್ಕಾಗಿ ದೆಹಲಿಯಲ್ಲಿ ತರಬೇತಿ ಕೇಂದ್ರದ ಭವನ ನಿರ್ಮಿಸಲಾಗುವುದು. ಜಿಲ್ಲೆಯ ಪ್ರತಿ ತಾಲೂಕಿನಿಂದ ಇಬ್ಬರು ಅಭ್ಯರ್ಥಿಗಳಿಗೆ ಭವನದಲ್ಲಿ ಪರಿಕ್ಷಾ ತಯಾರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಸುವರ್ಣ ವಿಧಾನಸೌಧದಲ್ಲಿ ರವಿವಾರ (ಮೇ.1
2025-26ನೇ ಸಾಲಿನ ಎಸ್‌.ಎಸ್.ಎಲ್.ಸಿ-ಪಿಯು.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

“ಬೆಳಗಾವಿ ಬೆಳಕು” 2025-26ನೇ ಸಾಲಿನ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸಾಧಕರಿಗೆ ಅಭಿನಂದನಾ ಸಮಾರಂಭ ಆಯೋಜಿಸಿರುವುದು ಸಂತಸದ ವಿಷಯವಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಇಡೀ ರಾಜ್ಯ ಬೆಳಗಾವಿ ಜಿಲ್ಲೆಯನ್ನು ಹೊಗಳುತ್ತಿದೆ. ಒಟ್ಟು 280 ಸಾಧಕರಿಗೆ ಸನ್ಮಾನ ಮಾಡುತ್ತಿದ್ದು, ಇಲ್ಲಿನ ಐಎಎಸ್ ಐಪಿಎಸ್ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಸ್ಥಾನವನ್ನು ಮುಂದಿನ ದಿನಗಳಲ್ಲಿ ನೀವು ಪಡೆದುಕೊಳ್ಳುವಂತೆ ಸಾಧಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ವತಿಯಿಂದ ಶೈಕ್ಷಣಿಕವಾಗಿ ಜಿಲ್ಲೆ ಬಹಳಷ್ಟು ಪ್ರಗತಿ ಹೊಂದುತ್ತಿದೆ. ಕಲಿಕೆಯ ಆಸಕ್ತಿ ಪ್ರತಿ ಮಕ್ಕಳಲ್ಲಿರಬೇಕು. ಕಲಿಕಾ ಆಸಕ್ತಿ ಇದ್ದರೆ ಮಾತ್ರ ಸಾಧನೆ ಸಾಧ್ಯ. ಇಲ್ಲಿನ ಪ್ರತಿ ಮಕ್ಕಳು ಭವಿಷ್ಯದಲ್ಲಿ ಅಧಿಕಾರಿ, ಡಾಕ್ಟರ್, ಇಂಜಿನಿಯರ್, ವಿಜ್ಞಾನಿಗಳು ಆಗಬೇಕು ಎಂಬುದು ನಮ್ಮ ಜಿಲ್ಲೆಯ ಆಶಯವಾಗಿದೆ ಎಂದರು.

ಕಲಿಕೆಯ ನಂತರ ನಿಮ್ಮ ಕೌಶಲ್ಯ, ಬುದ್ಧಿವಂತಿಕೆ ಮಾತ್ರ ಕೆಲಸ ಮಾಡಲಿದೆ. ಅಂಕ ಶಿಕ್ಷಣಕ್ಕೆ ಸೀಮಿತ ಅದೇ ರೀತಿಯಲ್ಲಿ ಸಾಮಾಜಿಕವಾಗಿ ಸಂದರ್ಭಗಳನ್ನು ನಿಭಾಯಿಸುವ ಕಲೆ, ಕೌಶಲ್ಯಗಳನ್ನು ಕರಗತ ಮಾಡಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲೆಯ ಯಮಕನಮರಡಿ, ಹಾರೂಗೇರಿ ಹಾಗೂ ಗೋಕಾಕದಲ್ಲಿ ಅಂದಾಜು 3 ರಿಂದ 4 ಕೋಟಿ ವೆಚ್ಚದಲ್ಲಿ ಹೈಟೆಕ್ ಗ್ರಂಥಾಲಯ ನಿರ್ಮಾಣ ಮಾಡಲಾಗುತ್ತಿದೆ. ಸರ್ಕಾರಿ ಶಾಲೆಗಳು ಸಂಪೂರ್ಣವಾಗಿ ಹೈಟೆಕ್ ಶಾಲೆಗಳನ್ನಾಗಿ ಪರಿವರ್ತಿಸುವುದು ಸರ್ಕಾರದ ಗುರಿಯಾಗಿದೆ. ಯಮಕನಮರಡಿ ಕ್ಷೇತ್ರದಲ್ಲಿ 150 ಸರ್ಕಾರಿ ಶಾಲೆ ನಿರ್ಮಾಣ ಮಾಡಲಾಗಿದ್ದು, ಅದೇ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ 100 ಶಾಲೆಗಳ ನಿರ್ಮಾಣಕ್ಕೆ ಯೋಜನೆಯಿದೆ ಎಂದು ತಿಳಿಸಿದರು.

ದೇಶವನ್ನು ಬಲಿಷ್ಠ ಮಾಡುವ ನಿಟ್ಟಿನಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಸಾಧನೆ ಮಾಡಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಶಿಕ್ಷಣ, ಆರ್ಥಿಕ ಪ್ರಗತಿ ಹೊಂದಲು ಅವಕಾಶ ಇರಲಿಲ್ಲ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಕೊಡುಗೆ ಪ್ರತಿಯೊಬ್ಬರು ಸ್ಮರಿಸಬೇಕು. ಭವಿಷ್ಯದಲ್ಲಿ ಉನ್ನತ ಸ್ಥಾನ ಪಡೆಯುವ ಮೂಲಕ ದೇಶಕ್ಕೆ ಮಾದರಿ ವ್ಯಕ್ತಿಗಳಾಗಿಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸಲಹೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮಾತನಾಡಿ ಈ ವರ್ಷ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಯು.ಪಿ.ಎಸ್.ಸಿ. ಸಾಧಕರನ್ನು ಸನ್ಮಾನಿಸಲಾಗಿದೆ. ತಾವು ಮುಂದೆಯೂ ಕೂಡ ಇದೇ ರೀತಿ ಸಾಧನೆ ಮಾಡಬೇಕು. ಸಮಾಜಕ್ಕೆ ಪ್ರೇರಣೆಯಾಗಬೇಕು ಎಂದು ಹೇಳಿದರು.

ಸಾಧಕರಿಗೆ ಸನ್ಮಾನ:
ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಸಾಧನೆಗೈದ ಬಸವರಾಜ ಕೆಂಪವಾಡ, ಕಿರಣ್ ಕಮತೆ, ರಾಹುಲ್ ಪಾಟೀಲ, ಬಸವರಾಜ ಎಂ ಪಾಟೀಲ ಅವರನ್ನು ಸನ್ಮಾನಿಸಲಾಯಿತು. ಅದೇ ರೀತಿಯಲ್ಲಿ ಎಸ್‌.ಎಸ್.ಎಲ್.ಸಿ-ಪಿಯು.ಸಿ ಪರೀಕ್ಷೆ ಅತ್ಯುತ್ತಮ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಶಾಸಕರಾದ ಮಹಾಂತೇಶ ಕೌಜಲಗಿ, ಆಸೀಪ್ (ರಾಜು) ಸೇಠ್, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ,
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ವಿನಯ ನವಲಗಟ್ಟಿ, ವಾಯುವ್ಯ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಸುನೀಲ ಹನುಮನ್ನವರ, ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ ಬೊರಸೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ, ಜಿಪಂ ಅಧಿಕಾರಿಗಳಾದ ರವಿ ಬಂಗಾರೆಪ್ಪನವರ್, ಬಸವರಾಜ ಅಡವಿಮಠ, ಗಂಗಾಧರ ದಿವಟರ್, ಶಾಲಾ ಸಾಕ್ಷರತಾ ಇಲಾಖೆ ಉಪ ನಿರ್ದೇಶಕಿ ಲೀಲಾವತಿ ಹಿರೇಮಠ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ,
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಸವರಾಜ ಕುರಿಹುಲಿ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!