ಬೆಳಗಾವಿ-31 : ಕೇಂದ್ರ ಸರ್ಕಾರ ಅಡುಗೆ ಅನಿಲ ಸಿಲಿಂಡರ್, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ನಗರದಲ್ಲಿನ ಚನ್ನಮ್ಮ ವೃತ್ತದಲ್ಲಿ ಅಡುಗೆ ಮಾಡುವುದರ ಮೂಲಕ ವಿನೂತನ ಪ್ರತಿಭಟಿಸಿದರು.

ಬೆಲೆ ಏರಿಕೆಯಿಂದ ಸಾಮಾನ್ಯ ಜನರು, ಬಡವರು ಹಾಗೂ ಮಧ್ಯಮ ವರ್ಗದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ಅಂಗವಾಗಿ ಕಾರ್ಯಕರ್ತರು ಕಟ್ಟಿಗೆ ಒಲೆ ಹಚ್ಚಿ ಅಡುಗೆ ಮಾಡುವ ಮೂಲಕ ಇಂಧನ ಹಾಗೂ ಅಡುಗೆ ಅನಿಲ ದರ ಏರಿಕೆಯ ಪರಿಣಾಮವನ್ನು ಜನರ ಮುಂದಿಟ್ಟರು.
ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ದರಗಳು ಹೆಚ್ಚುತ್ತಿದ್ದು, ಇದರ ನೇರ ಹೊರೆ ಜನಸಾಮಾನ್ಯರ ಮೇಲೆ ಬೀಳುತ್ತಿದೆ. ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು.
ತಕ್ಷಣವೇ ಅಡುಗೆ ಅನಿಲ, ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ಇಳಿಸಿ ಜನರಿಗೆ ಪರಿಹಾರ ಒದಗಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಪ್ರತಿಭಟನೆಯು ಕೆಲಕಾಲ ಚನ್ನಮ್ಮ ವೃತ್ತದಲ್ಲಿ ಗಮನ ಸೆಳೆಯಿತು.
ಈ ವೇಳೆ ಬೆಳಗಾವಿ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಆಯಿಷಾ ಸನದಿ, ಮಂಜುನಾಥ ಕಾಂಬಳೆ, ಮೋಹನ್ ರೆಡ್ಡಿ, ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು..
