ಬೆಳಗಾವಿ-20: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೊಳಿಸುತ್ತಿರುವ, ವಿವಿಧ ಕ್ಷೇತ್ರಗಳ ಖಾಸಗೀಕರಣ ನೀತಿಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು.
ಶುಕ್ರವಾರ ಹಲವು ರೈತ ಸಂಘಟನೆಯ ಮುಖಂಡರು ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ಖಾಸಗೀಕರಣದ ವಿರುದ್ದ ಅಸಮಾಧಾನ ಹೋರ ಹಾಕಿದರು.
ರೈತರು ದೇಶದ ಆಹಾರ ಭದ್ರತೆಯ ಬೆನ್ನೆಲುಬಾಗಿದ್ದು, ಪ್ರತಿಕೂಲ ಹವಾಮಾನ, ಬೆಲೆ ಏರಿಳಿತ, ಉತ್ಪಾದನಾ ವೆಚ್ಚ ಹೆಚ್ಚಳ ಸೇರಿದಂತೆ ಹಲವು ಸಂಕಷ್ಟಗಳ ನಡುವೆಯೂ ಅನ್ನದಾತರು ದೇಶದ ಜನತೆಗೆ ಆಹಾರ ಒದಗಿಸುವ ಮಹತ್ತರ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೃಷಿ, ವಿದ್ಯುತ್, ನೀರಾವರಿ ಹಾಗೂ ಸಾರ್ವಜನಿಕ ಸೇವಾ ಕ್ಷೇತ್ರಗಳಲ್ಲಿ ಖಾಸಗೀಕರಣಕ್ಕೆ ಉತ್ತೇಜನ ನೀಡುವುದು ರೈತ ಸಮುದಾಯಕ್ಕೆ ಮತ್ತಷ್ಟು ಸಂಕಷ್ಟ ಉಂಟುಮಾಡಲಿದೆ ಎಂದು ಆರೋಪ್ಪಿಸಿದರು.
ಸರ್ಕಾರ ರೈತರಿಗೆ ವೈಜ್ಞಾನಿಕ ಬೆಲೆ ನಿಗದಿ, ಉತ್ಪಾದನಾ ವೆಚ್ಚಕ್ಕೆ ಅನುಗುಣವಾದ ಬೆಂಬಲ ಬೆಲೆ, ನೀರಾವರಿ ಸೌಲಭ್ಯ ಹಾಗೂ ಕೃಷಿ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ರೈತರ ಹಿತಾಸಕ್ತಿಗೆ ವಿರುದ್ಧವಾಗಿರುವ ಯಾವುದೇ ನೀತಿಗಳನ್ನು ಜಾರಿಗೊಳಿಸಬಾರದು ಎಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡರು.
ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಸಹಿರು ಸೇನೆಯ ಮುಖಂಡರು, ಸದಸ್ಯರು, ಪದಾಧಿಕಾರಿಗಳು ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು .
