ಬೆಳಗಾವಿ-28: ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಬೆಳಗಾವಿಯಲ್ಲಿ ನಡೆಯುತ್ತಿದ್ದ ಅಭಿಪ್ರಾಯ ಸಂಗ್ರಹ ಸಭೆಯು ತೀವ್ರ ರಾದ್ಧಾಂತಕ್ಕೆ ಕಾರಣವಾಗಿದೆ. ನಾಯಕರ ಹಾಗೂ ಕಾರ್ಯಕರ್ತರ ನಡುವಿನ ವೈಮನಸ್ಸಿನಿಂದಾಗಿ ಸಭೆಯಲ್ಲೇ ಹೊಡೆದಾಡಿಕೊಂಡಿರುವ ಘಟನೆಯೊಂದು ಬೆಳಗಾವಿ ಕಾಂಗ್ರೆಸ್ ಕಛೇರಿಯಲ್ಲಿ ನಡೆದೆ.
ಸೋಮವಾರ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಎಐಸಿಸಿ ವೀಕ್ಷಕರಾದ ಮನೋಜ್ ಚವ್ಹಾಣ್ ಅವರ ನೇತೃತ್ವದಲ್ಲಿ ನಗರ ಘಟಕದ ಅಧ್ಯಕ್ಷರ ಆಯ್ಕೆ ಸಂಬಂಧ ಅಭಿಪ್ರಾಯ ಸಂಗ್ರಹ ಸಭೆ ಕರೆಯಲಾಗಿತ್ತು. ಈ ವೇಳೆ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಶಾಸಕ ರಮೇಶ ಕುಡಚಿ ಅವರು ಪಕ್ಷದ ಪ್ರಸ್ತುತ ಬೆಳವಣಿಗೆಗಳು ಮತ್ತು ನಾಯಕರ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದರು.
ರಮೇಶ ಕುಡಚಿ ಅವರ ಮಾತಿನಿಂದಾಗಿ ಸ್ಥಳದಲ್ಲಿದ್ದ ನಾಯಕರು ಹಾಗೂ ಕಾರ್ಯಕರ್ತರ ನಡುವೆ ತೀವ್ರ ಮಾತಿನ ಚಕಮಕಿ ಆರಂಭವಾಯಿತು. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ, ಪರಸ್ಪರ ಹೊಡೆದಾಟ ನಡೆಸುವ ಹಂತಕ್ಕೆ ತಲುಪಿತು.
ರಮೇಶ ಕುಡಚಿ ಆಪ್ತನ ಮೇಲೆ ಹಲ್ಲೆ ಆರೋಪ: ಈ ಗಲಾಟೆಯ ಸಂದರ್ಭದಲ್ಲಿ ಮಾಜಿ ಶಾಸಕ ರಮೇಶ ಕುಡಚಿ ಅವರ ಆಪ್ತ ಹೇಮಂತ್ ಲೇಂಗಡೆ ಎಂಬುವವರ ಮೇಲೆ ಕೆಲ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹೇಮಂತ್ ಲೇಂಗಡೆ ಅವರು ಕಳೆದ ಕೆಲವು ಸಮಯದಿಂದ ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷದ ಪ್ರಮುಖ ಮುಖಂಡರ ವಿರುದ್ಧ ನಿರಂತರವಾಗಿ ಪೋಸ್ಟ್ಗಳನ್ನು ಹಾಕುತ್ತಿದ್ದುದೇ ಈ ಹಲ್ಲೆಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.

ಘಟನೆಯಿಂದಾಗಿ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಕೆಲವು ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
